Monday, 31 December 2012

ವರುಷವೊಂದು ಉರುಳಿದ್ದು ...


ಸ್ವಲ್ಪ ಅತ್ತಿದ್ದು ... ಜಾಸ್ತಿ ನಕ್ಕಿದ್ದು ..
ಒಂಚೂರು ಸಾಧನೆ ...
ಸಿಕ್ಕ ಬೆಟ್ಟದಷ್ಟು ಪ್ರೀತಿ ..
ನಮ್ಮವರೇ ನಮಗೆ ಮೋಸ ಮಾಡಿದ್ದು ..
ಯಾರೋ ನಮ್ಮವರಾಗಿದ್ದು ..
ಪರಿಚಿತರು ಅಪರಿಚಿತರಾದದ್ದು ..
ಅಪರಿಚಿತರು ಪರಿಚಿತರಾದದ್ದು ..
ದಿನಗಳು ಬದಲಾದಂತೆ ..
ಬದುಕು ಬದಲಾದದ್ದು ...
ಎಲ್ಲವೂ ಈಗ ಇತಿಹಾಸವೇ ..
ವರುಷವೊಂದು ರೆಪ್ಪೆ ಮಿಟುಕಿಸುವಂತೆ ಉರುಳಿ ಹೋಯಿತು ...

Wednesday, 19 December 2012

ನೀ ಬಂದ ದಿನ ಅದರಲ್ಲೊಂದು ಚಂದದ ಹೂ ಅರಳಿರುತ್ತದೆ.. ನಮ್ಮ ಪ್ರೀತಿಗಾಗಿ...



ಬಂಗಾರ ನೀರ ಕಡಲಾಚೆಗೀಚೆಗಿದೆ ನೀಲ ನೀಲ ತೀರ.... ಎಂಬ ಬೇಂದ್ರೆಯವರ ಹಾಡು ಕೇಳುತ್ತಾ ಸಮುದ್ರಕ್ಕೆ ಮುಖ ಮಾಡಿ  ನಿಂತಿದ್ದೆ ಈ  ಸಂಜೆ. ನಿನಗಿಷ್ಟ ಆ ಹಾಡು .. ಆ ಕಾರಣಕ್ಕೆ ಅದು ನನಗೂ ಇಷ್ಟ.. ನಿನ್ನೊಂದಿಗಿನ ಬೆಚ್ಚನೆಯ, ಚುಚ್ಚುವ , ಕಾಡುವ ನೆನಪುಗಳಿಗೆಲ್ಲ ಯಾವಾಗಲೂ ನಾಂದಿ ಹಾಡುವುದು ನೀನು. "ನೀನು" ಎಂಬೊಂದು ಶಬ್ದ ನೆನಪಾದರೆ ಸಾಕು ಹಿಂದೆಯೇ ಸಾವಿರ ನೆನಪುಗಳ ಹಣತೆಯ ಸಾಲುಗಳು ಹೊತ್ತಿಕೊಳ್ಳುತ್ತವೆ. ಕೆಲವು ಬೆಳಗುತ್ತವೆ, ಕೆಲವು ಸುಡುತ್ತವೆ, ಕೆಲವು ಆರುತ್ತವೆ. ಎಲ್ಲವನು ಹರವಿಕೊಂಡು ಒಮ್ಮೆ ನೋಡುತ್ತೇನೆ. ಮತ್ತೆ ಎಲ್ಲವನ್ನು ಜತನದಿಂದ ಎತ್ತಿಡುವ ಹೊತ್ತಿಗೆ ಕೆಲವೊಮ್ಮೆ ನಗುವಿನ ಹಣತೆಗೆ ಕಣ್ಣೀರೇ ತೈಲವಾಗಿರುತ್ತದೆ..
 ಯಾವಾಗಲೂ ಜೋತೆಗಿರುತ್ತೇನೆ ಎಂದು ಮಾಡಿದ ಆಣೆ ಪ್ರಮಾಣವನ್ನು ಅದೆಷ್ಟು ಶ್ರದ್ಧೆಯಿಂದ ನಿರ್ವಹಿಸುತ್ತೀಯಾ. ಒಂಟಿತನದಲ್ಲಿ ನೀನಿಲ್ಲವೆಂದರೆ ನಿನ್ನ ನೆನಪುಗಳಾದರೂ ಜೋತೆಗಿರುತ್ತವೆ. ಪ್ರೀತಿಯ ಎಲ್ಲ ಮುಖಗಳನ್ನೂ  ತೋರಿದ್ದು ನಿನ್ನ ಪ್ರೀತಿ.. ಎಲ್ಲವನ್ನೂ ಮೀರಿದ್ದು ನಿನ್ನ ಪ್ರೀತಿ.. ಜೀವನದಲ್ಲಿ ಎಲ್ಲದರ ಜೊತೆಗೆ ನಿನ್ನನ್ನೂ  ಸಹಿಸಿಕೊಳ್ಳುವ ತಾಳ್ಮೆ ಕಲಿಸಿದ್ದು ನಿನ್ನ ಪ್ರೀತಿ. ಅದಕ್ಕೆ ಈ ದೂರ ಮತ್ತು ವಿರಹವನ್ನು ತಾಳ್ಮೆಯಿಂದ ಸಹಿಸಿಕೊಳ್ಳುತ್ತಿರುವುದು. ನೆನಪಿರಲಿ ಸಹನೆಗೂ ಮಿತಿಯಿದೆ.ಈ ದೂರ ಒಮ್ಮೊಮ್ಮೆ  ನೀನೆಲ್ಲಿ ನನ್ನ ಮರೆತೆಯೋ ಎಂಬ ಅನುಮಾನವನ್ನು ಹೆಡೆಯಾಡುವಂತೆ ಮಾಡಿ ಬಿಡುತ್ತದೆ. ಬೆನ್ನ ಹಿಂದೆಯೇ ನನ್ನ ಮರೆತರೆ ನಿನ್ನದೆಲ್ಲಿದೆ ಬದುಕು ? ಎಂಬ ನಂಬಿಕೆ ಕೈ ಹಿಡಿಯುತ್ತದೆ.ಎಡಗೈಯ್ಯ ಕಿರು ಬೆರಳು ಕೂಡಾ ನಿನ್ನ ಹೆಸರನ್ನು ಸರಾಗವಾಗಿ ಗೀಚಲು ಕಲಿತಿದೆ. ಯಾಕೋ ನಿನ್ನೊಂದಿಗಿನ ಬದುಕಿನ ಚಿತ್ರಗಳೆಲ್ಲ ಬಣ್ಣ ಕಳೆದುಕೊಂಡು ಮಸುಕಾಗಿವೆ  ಎನಿಸುತ್ತಿದೆ. ಅವೆಲ್ಲ ನಿನ್ನ ಕಣ್ಣ ಬೆಳಕ ಕಂಡೊಡನೆ ಮತ್ತೆ ಹೊಳೆಯುತ್ತವೆ ಬಿಡು. ಕನಸಿನ ಲೋಕದಲ್ಲಿ ನಾವೇ ನಿರ್ಮಿಸಿದ ನಮ್ಮ ಮುಂದಿನ ಬದುಕಿನಂಗಳಕ್ಕೆ ಆಗಾಗ ಹೋಗಿ ಬರುತ್ತಿದ್ದೇನೆ ಒಂಟಿಯಾಗಿ. ಆಗೆಲ್ಲ ನನ್ನ ಕೈ ಬೆರಳುಗಳ ನಡುವಿನ ಅಂತರವನ್ನು ತುಂಬಲು ನೆನ್ನ ಬೆರಳುಗಳಿರಬೇಕಿತ್ತು  ಎನಿಸುತ್ತದೆ. ಕನಸಿನೂರ ಕಾವಲುಗಾರನಿಗೆ ಮಾತು ಕೊಟ್ಟು ಬಂದಿದ್ದೀನಿ ,ಮುಂದಿನ ಸಲ ನಿನ್ನೊಂದಿಗೆ ಬರುತ್ತೇನೆ ಎಂದು. ನನ್ನ ಮಾತು ಉಳಿಸುವ ಜವಾಬ್ದಾರಿ ನಿನ್ನ ಮೇಲಿದೆ ನೆನಪಿರಲಿ...

ನಂಬಿಕೆಯಿಂದ ನೀರೆರೆಯುತ್ತಿರುವ ನಿರೀಕ್ಷೆಯ ಗಿಡ ನೀ ಬರುವ ದಿನಗಳು ಹತ್ತಿರವಾದಂತೆಲ್ಲ ದಿನಕ್ಕೆರಡು ಎಲೆಗಳಂತೆ ಚಿಗುರುತ್ತಿದೆ. ಯಾವಾಗ ಮೊಗ್ಗು ಬಿಡುವುದೋ ಎಂದು ಕಾಯುತ್ತಿದ್ದೇನೆ. ಅದೇನೇ ಇರಲಿ ನೀ ಬಂದ ದಿನ ಅದರಲ್ಲೊಂದು ಚಂದದ ಹೂ ಅರಳಿರುತ್ತದೆ.. ನಮ್ಮ ಪ್ರೀತಿಗಾಗಿ...

(ಇದು ೨೭.೧೧.೨೦೧೨ ರ ಲವಲವಿಕೆಯಲ್ಲಿ ಪ್ರಕಟವಾಗಿತ್ತು )

Wednesday, 5 December 2012

ಒಂಟಿ ಮರ ಮತ್ತು ಖಾಲಿ ಬೆಂಚು




ಇರೋನೊಬ್ಬ ಮಗ ನೀನು , ನಿನ್ನತ್ರ ಹೊಸದಾಗಿ ಏನಾದ್ರೂ ಮಾಡು ಅಂತ ಹೇಳ್ತಾ ಇಲ್ಲ . ನಾ ಮಾಡಿಟ್ಟ ಈ ಜಮೀನು ಮನೆ , ನೀ ನೋಡಿಕೊಂಡು ಹೋದರೆ ಸಾಕು ಎನ್ನುತ್ತಿದ್ದೇನೆ .ಅಷ್ಟೂ ಆಗಲ್ವಾ  ಅಂತ ಕೇಳಿದ ಅಪ್ಪನಿಗೆ ಹೋಗಪ್ಪಾ ಈ ಹಾಳು ಊರಲ್ಲಿ ಏನಿದೆ ಅಂತ ಇರಲಿ ? "ಇಲ್ಲಿರಲ್ಲ" ಎಂದು ಅಪ್ಪನೊಡನೆ ಜಗಳ ಆಡಿ  ಬಂದವನು  ನನ್ನಿಷ್ಟದ ಒಂಟಿ ಮರದ ಕೆಳಗಿನ ಖಾಲಿ ಬೆಂಚ್ ಹತ್ತಿರ ಬಂದಿದ್ದೆ. ಒಂದು ಸ್ವಲ್ಪ ಸಮಾಧಾನಿಸಿಕೊಳ್ಳಬೇಕಿತ್ತು ನನ್ನನ್ನು ನಾನು. ಆದರೆ ಅವತ್ತು ಅದು ಖಾಲಿ ಇರಲಿಲ್ಲ .ಅಲ್ಲಿ ನೀನಿದ್ದೆ . ಅದ್ಯಾವ ಪರಿ ನೀ ಚಲನೆ ಇಲ್ಲದೆ ಕುಳಿತಿದ್ದೆ ಎಂದರೆ ಕಣ್ಣ ರೆಪ್ಪೆಗಳ ಚಲನೆಯಿಂದಾಗಿ ನಿನಗೂ ಜೀವವಿದೆ ಎಂದು ನಾ ತೀರ್ಮಾನಿಸಿದ್ದೆ. ಏನು ನೋಡ್ತಿದ್ದೀರಾ ? ಎಂದು ಕೇಳಿದ್ದೆ ಧೈರ್ಯ ಮಾಡಿ, "ಸೂರ್ಯ ಮುಳುಗುತ್ತನಾ ಅಂತ" ..ಉತ್ತರ ಬಂತು ."ಅಲ್ಲಿ ಮುಳುಗಲ್ಲ ಬಿಡಿ.."ಎಂದರೆ "ಯಾಕ್ರೀ ಇವತ್ತು ಸೂರ್ಯ ಮುಳುಗಲ್ಲ ಅಂತ ನಿಮಗೆ ಹೇಳಿದ್ದಾನಾ?"  ಇಲ್ಲ, ಇದು ಪೂರ್ವ ನಮ್ಮೂರಲ್ಲಿ ಸೂರ್ಯ ಪಶ್ಚಿಮದಲ್ಲಿ ಮುಳುಗುತ್ತಾನೆ. ಊರಿಗೆ ಹೊಸಬರಾ ? ಅಂತ ಕೇಳಿದೆ.  ಇಲ್ಲಾರಿ ನಿನ್ನೇನೆ ಬಂದ್ವಿ, ಅಪ್ಪ ಹೆಲ್ತ್ ಡಿಪಾರ್ಟ್ಮೆಂಟ್ ಲಿದ್ದಾರೆ, ಈ ಊರಿನ ಅರ್ದ ಬೀದಿಗಳು ಗೊತ್ತಾಗಿವೆ. ಬೆಳಿಗ್ಗೆ ತಾನೇ ಗುಡಿಗೆ ಹೋಗಿ ನಿಮ್ಮೂರ ದೇವ್ರನ್ನ ಫ್ರೆಂಡ್ ಮಾಡಿಕೊಂಡು ಬಂದಿದ್ದೀನಿ ಅಂತ ಪಟ ಪಟಾಂತ ಹೇಳಿದ್ದು ಕೇಳಿ ನಗು ಬಂದಿತ್ತು. ನಿಮ್ಮೂರಲ್ಲಿ  ಇದೇ ಪಶ್ಚಿಮ ಆಗಬಹುದಿತ್ತು ಗುಡ್ಡಗಳ ನಡುವೆ ಚಂದದ ಸೂರ್ಯಾಸ್ತ  ನೋಡಬಹುದಿತ್ತು ಎಂದಾಗ , ಈಗಲೂ ಸೂರ್ಯೋದಯ ನೋಡಬಹುದು ಎಂದೆ. ಹೌದಲ್ವ ಎಂದು ಕಣ್ಣರಳಿಸಿ .. ಸರಿ ಬರ್ತಿನ್ರಿ .. ಶಾಸ್ತ್ರಿಗಳ ಮನೆಗೆ ಹೋಗಿ ನಾಳೆ ಸೂರ್ಯೋದಯ ಎಷ್ಟು ಹೊತ್ತಿಗೆ ಎಂದು ಕೇಳಬೇಕು ಎನ್ನುತ್ತಾ ಓಡಿ  ಹೋದವಳ ನೋಡುತ್ತಾ ನಿಂತವನಿಗೆ, ಹೆಸರೇನು ? ಎಂದು ಕೇಳಬೇಕೆಂಬ ಪ್ರಶ್ನೆ ಗಂಟಲಲ್ಲೇ ಉಳಿದಿತ್ತು. ಹತ್ತು ನಿಮಿಷದಿಂದ ಎಲ್ಲೋ ಬೇರೆ ಲೋಕದಲ್ಲೇ ಇದ್ದೆ ಎಂಬ ಅನುಭವ ಬಂದಿತ್ತು . ಅದ್ಯಾವುದೋ ಒಂದು ಆಕರ್ಷಣೆ ಮೊಳಕೆಯೊಡೆದಿತ್ತು. ಮನೆಗೆ ಬಂದು ಅಮ್ಮನಲ್ಲಿ ನಾಳೆ ಸೂರ್ಯೋದಯ ಎಷ್ಟು ಹೊತ್ತಿಗೆ ಎಂದು ಕೇಳಿ ಅಲಾರಂ ಸೆಟ್ ಮಾಡಿ ಮಲಗಿದ್ದೆ . 

ಬೆಳಿಗ್ಗೆ ಸೂರ್ಯೋದಯ ನೋಡಲು ಬಂದರೆ ಸೂರ್ಯನಿಗಿಂತ ಮೊದಲು ಕಾಣಿಸಿದ್ದು ನೀನು .ಬಂದ್ರಾ .. ಇನ್ನು ಐದೇ ನಿಮಿಷ ಬಾಕಿ ಅಂತ ಗುಡ್ಡಗಳ ನಡುವೆ ಕಣ್ಣಿಟ್ಟು ಕುಳಿತವಳ ನೋಡುವುದೇ ಮಜವಾಗಿತ್ತು ನನಗೆ.ಸೂರ್ಯೋದಯದ ಮೊದಲ ಕಿರಣಗಳು ನಿನ್ನ ಮುಖದ ಮೇಲೆ ಬಿದ್ದು , ಅದು ಬಂಗಾರ ವರ್ಣವಾದಾಗಲಂತೂ ದೇವತೆಯಂತೆ ಕಂಡಿದ್ದೆ ನೀನು. ಏನು ಓದಿದ್ದು ನೀವು ಎಂದು ಕೇಳಿದ್ದೆ, ಏನಾದರೂ ಮಾತಾನಾಡಬೇಕೆಂದು. ಡಿಗ್ರೀ ಮುಗಿದಿದೆ ಎಂದೆನೀನು. ಡಾಕ್ಟರ್ ಮಗಳು ಡಾಕ್ಟರ್ ಅಥವಾ ಇಂಜಿನಿಯರ್ ಇರಬೇಕು ಅಂದುಕೊಂಡೆ ಎಂದರೆ.ನನಗೆ ನಾಲ್ಕು ಗೋಡೆಗಳ ನಡುವೆ ಕುಳಿತು ಕಲಿಯಲು ಇಷ್ಟವಿಲ್ಲಾರಿ.ಪ್ರಕೃತಿಯೊಂದಿಗೆ ಕಲಿಯಬೇಕು. ಕಾಡು-ಮೇಡು ಅಲೆಯಬೇಕು , ಗದ್ದೆ ತೋಟ ತಿರುಗಬೇಕು. ಹಲಸಿನ ಹೂವು ಹಣ್ಣಾಗುವುದರಿಂದ ಹಿಡಿದು ಹಸು ಕರು ಹಾಕುವಲ್ಲಿಯವರೆಗೂ ಪ್ರಕೃತಿಯಲ್ಲಿ ಎಷ್ಟು ವೈಚಿತ್ರ್ಯ ಗಳಿವೆ ಗೊತ್ತಾ..ಪ್ರತಿಕ್ಷಣಕ್ಕೂ ಕುತೂಹಲದ ಮೂಟೆ ಇದು ,ಪ್ರಕೃತಿಯಿಂದ ಮನುಷ್ಯ ಕಲಿಯಬೇಕು , ಅದರೊಂದಿಗೆ ಬೆಳೆಯಬೇಕು ಎಂದಾಗ, ನನಗೆ ಏನು ಹೇಳಲು ತೋಚದೆ ಹೆಸರೇನು? ಎಂದು ಕೇಳಿದೆ. "ಪ್ರಕೃತಿ " ಎಂದವಳು , ಅಮ್ಮಾ ಕಾಯ್ತಾ ಇರ್ತಾರೆ ಸಂಜೆ ಸಿಕ್ತೀನಿ ಅಂತ ಹೊರಟು ಹೋಗಿದ್ದೆ ನೀನು. 


(ಫೋಟೋ : ರಂಜಿತಾ ಹೆಗಡೆ) 


ಮನೆಗೆ ಬಂದವನನ್ನು ಅಮ್ಮ "ಏನು ಯೋಚನೆ ಮಾಡಿದೆ" ಎಂದು ಕೇಳಿದರೆ , ಇಲ್ಲೇ ಇರುತ್ತೆನಮ್ಮ ,ಪ್ರಕೃತಿಯೊಂದಿಗೆ ಕಲಿಯಬೇಕಿದೆ ಎಂದಿದ್ದೆ. ಯಾಕೆ ಹಾಗೆ ಹೇಳಿದ್ದೆ ಎಂದು ಇವತ್ತಿಗೂ ಗೊತ್ತಿಲ್ಲ. ಆದರೆ ಆರು ತಿಂಗಳಿನಿಂದ ಇಲ್ಲಿಯೇ ಇದ್ದೇನೆ.ಕೃಷಿಯನ್ನು ಜೀವನ ಮಾಡಿಕೊಂಡಿದ್ದೇನೆ. ಪ್ರಕೃತಿಯ ಹಲವು ವೈಚಿತ್ರ್ಯಗಳಿಗೆ ಕಣ್ಣರಳಿಸಿದ್ದೇನೆ. ಕೃಷಿ ವರ್ಷಕ್ಕೊಮ್ಮೆ ಉತ್ಪನ್ನ ನೀಡುತ್ತದಾದರೂ  ತಿಂಗಳ ತಿಂಗಳ ಸಂಬಳ ಕೈಗೆ  ಕೊಡುವ ಕೆಲಸಕ್ಕಿಂತ ಹೆಚ್ಚು  ಸಂತೋಷ  ಕೊಟ್ಟಿದೆ , ನೆಮ್ಮದಿ ಕೊಟ್ಟಿದೆ, ಅಪ್ಪ ಅಮ್ಮನ ಮುಖದಲ್ಲೂ ನೆಮ್ಮದಿ ಕಂಡಿದ್ದೇನೆ. ಎಲ್ಲಕ್ಕಿಂತ ಹೆಚ್ಚಾಗಿ ನಿನ್ನ ಸ್ನೇಹವಿದೆ, ನಾನ್ ಸ್ಟಾಪ್ ಹರಟೆಗಾಗಿ ಪ್ರತಿ ಸಂಜೆಯೂ ಕಾಯುತ್ತಿದೆ.ಈ ಸ್ನೇಹ ಸ್ನೇಹಾವಾಗಿಲ್ಲ ಎನಿಸಿದ ದಿನ, ನೀನೇ  ಕೊಟ್ಟ ಗುಲಾಬಿ ಗಿಡದಲ್ಲಿ ಅರಳಿದ್ದ ಹೂ ತಂದು, ಇದೇ  ಒಂಟಿ ಮರದಡಿಯ ಕಲ್ಲು ಬೆಂಚಿನ ಮುಂದೆ ನಿನಗೆ I love you ಎಂದಿದ್ದೆ. ಹೂ ತೆಗೆದು ಕೊಂಡವಳು ದೊಡ್ಡದಾಗಿ ಹೇಳು, ಗುಡ್ಡಗಳಿಂದ ಪ್ರತಿದ್ವನಿಸಬೇಕು ಎಂದೆ .ನಾನು  ದೊಡ್ಡದಾಗಿ ಹೇಳಿದಾಗ ಗುಡ್ಡಗಳಿಂದ ಬಂದ ಪ್ರತಿಧ್ವನಿ ಗೆ ಕಿವಿಕೊಟ್ಟು , ನಾನು ಹೇಳಿದರೂ ಹೀಗೆ ಕೇಳುತ್ತಾ? ಎಂದು ಕೇಳಿದವಳ ಮುಖ ನೋಡುತ್ತಾ ಒಳ್ಳೆಯ ಮನಸ್ಸಿನಿಂದ ಹೇಳಿದರೆ ಪ್ರತಿಧ್ವನಿಸುತ್ತೆ ಎಂದೆ. ಹೋಗೋ ನನಗಷ್ಟು ಒಳ್ಳೆ ಮನಸ್ಸಿಲ್ಲ ಎಂದು ಬೆಂಚಿನ ತುದಿಯಲ್ಲಿ ಕೆನ್ನೆಯುಬ್ಬಿಸಿ  ಕುಳಿತವಳನ್ನು, ತಮಾಷೆಯಲ್ಲ ನನ್ನನ್ನು ಮದುವೆ ಆಗ್ತಿಯಾ? ಎಂದು ಕೇಳಿದೆ. ಕಣ್ಣಲ್ಲಿ ಕಣ್ಣಿಟ್ಟು ನನಗೆ ಟೈಮ್ ಬೇಕು ಅಂತ ಹೇಳಿ ಅನಾಮತ್ತು ನೂರ ಅರವತ್ತೆಂಟು ಗಂಟೆಗಳ ಕಾಲ  ಕಾಯಿಸಿದ್ದೀಯ.ನೀ ಕೊಟ್ಟ ಗಡವು ಇವತ್ತಿಗೆ ಕೊನೆಯಾಗಿದೆ.  ನಮ್ಮ ಸ್ನೇಹ ಕಂಡ ಅಪ್ಪ ಅಮ್ಮಂದಿರಿಂದ ಹಿಡಿದು ನಮ್ಮನೆಯ ಕೊಟ್ಟಿಗೆಯ ನಿನ್ನದೇ ಹೆಸರಿನ ಕರುವರೆಗೆ ಎಲ್ಲರೂ ನಮ್ಮ ಪ್ರೀತಿಯನ್ನು ಒಪ್ಪಿಕೊಳ್ಳುತ್ತಾರೆ ಕಣೆ. ಮುಖ್ಯವಾಗಿ ನೀನೋಪ್ಪಬೇಕಿದೆ. ನಿನ್ನ ಮಾತಿಗೆ ಪ್ರತಿಧ್ವನಿಸಲು ಹಸಿರು ಗುಡ್ದಗಳೆಲ್ಲ  ಮಂಜಿನ ಸೆರಗು ಹೊದ್ದು ಸಿಂಗಾರ ಗೊಂಡಿವೆ, ಆ ಪ್ರತಿಧ್ವನಿಗೆ ನಾ ಕಾಯುತ್ತಿರುವಂತೆ, ನಮ್ಮಿಬ್ಬರಿಗಾಗಿ ಆ ಒಂಟಿ ಮರ ಮತ್ತು ಖಾಲಿ ಬೆಂಚು ಕಾಯುತ್ತಿವೆ.. .. 


(ಗೆಳತಿ ರಂಜಿತಾ ಹೆಗಡೆ ತೆಗೆದ ಫೋಟೋ ನನ್ನಿಂದ ಬರೆಸಿದ ಸಾಲುಗಳಿವು .. Special Thanks to Ranjithaa..:) ) 

Saturday, 3 November 2012

" ಸನ್ನೆಯಲ್ಲಿ ಮಾತನಾಡುವುದನ್ನು ಕಲಿಯಬೇಕಿದೆ ನನಗೆ".





ಮೌನ ಕೊಲ್ಲುತ್ತಿತ್ತು ಅಲ್ಲಿ. ಆದರೆ ಮಾತು ಸತ್ತು ತುಂಬಾ ದಿನಗಳಾಗಿದ್ದವು ಆ ಮನೆಯಲ್ಲಿ. ಮೂರು ಜನ ಅಕ್ಷರಶಃ  ದ್ವೀಪದಂತೆಯೇ ಬದುಕಿದ್ದೆವು ಅಲ್ಲಿ. ಮೂಕ ಅಪ್ಪ. ಮಾತು ಬಂದರೂ ಮೂಕಿಯಂತೆಯೇ ಬದುಕುತ್ತಿದ್ದ ಅಮ್ಮ. ಮತ್ತು ನನ್ನ ಮಾತುಗಳು ಇವರಿಗೆಲ್ಲಿ ತಿಳಿದೀತು ಎಂಬ ಅಹಂಕಾರದಲ್ಲಿ ಮಾತೇ ಆಡದೆ ಇರುತ್ತಿದ್ದ ನಾನು. ನಾಲ್ಕು ಅಕ್ಷರ ಕಲಿತವಳಲ್ಲವೇ , ಕಲಿಸಿದವರ ನೆನಪಿರಲಿಲ್ಲ. ಜಾಣೆ ನಾನು. ಆಟ ಪಾಠಗಳಲ್ಲೆಲ್ಲ ನಾನೇ ಮೊದಲು.ನನ್ನ ಯಶಸ್ಸನ್ನು ಮನೆಯಲ್ಲಿ ಹೇಳಿದರೆ ಅಮ್ಮ ದೇವರ ಮುಂದೆ ತುಪ್ಪದ ದೀಪ ಹಚ್ಚಿ , ಹೀಗೆ ಒಳ್ಳೆದಾಗಲಿ ಎನ್ನುತ್ತಿದ್ದಳು. ಮಾತು ಬಾರದ ಅಪ್ಪ ಕಣ್ಣಲ್ಲಿ ನೀರು ತುಂಬಿಕೊಂಡು ಏನೇನೋ ಅರ್ಥವಾಗದ ಸನ್ನೆ ಮಾಡುತ್ತಿದ್ದ. ನಾನದನ್ನು ಅರ್ಥ ಮಾಡಿಕೊಳ್ಳುವ ಪ್ರಯತ್ನವನ್ನೂ  ಮಾಡಿರಲಿಲ್ಲ. ಅವನ ಕೈ ಸನ್ನೆಗಳು ಅರ್ಥವಾಗದ ಜನ ಅವನನ್ನು ನೋಡಿ ನಗುತ್ತಿದ್ದರು. ನನ್ನನ್ನು ಮೂಗನ ಮಗಳೆಂದು ಊರವರು ಗುರುತಿಸುತ್ತಿದ್ದರೆ ಅಸಹ್ಯವಾಗುತ್ತಿತ್ತು .ಅವಮಾನವಾದಂತಾಗುತ್ತಿತ್ತು. ಅದಕ್ಕೆ ಯಾರೆದುರಿಗೂ ಆತ ನನ್ನ ತಂದೆಯೆಂದು ಹೇಳುತ್ತಲೇ ಇರಲಿಲ್ಲ.  ಯಾರನ್ನು ಮನೆಗೆ ಕರೆಯುತ್ತಿರಲಿಲ್ಲ. ಕಾಲೇಜು ಮತ್ತು ಹಾಸ್ಟೆಲ್ ನಲ್ಲಿ ಅನಾಥೆ ಅಂತ ಹೇಳಿಕೊಂಡೆ ಕಾಲೇಜ್ ಮುಗಿಸಿದ್ದೆ. 

ಒಂದು ಒಳ್ಳೆ ಕಂಪನಿಯಲ್ಲಿ ಕೆಲಸ ಸಿಗುವುದರಲ್ಲಿತ್ತು. ಕೆಲಸ ಸಿಕ್ಕ ತಕ್ಷಣ ಈ ಮುದಿ ಜೀವಗಳನ್ನು ಬಿಟ್ಟು ಎಲ್ಲಾದರೂ ದೂರ ಹೋಗಿ ಬದುಕಬೇಕು . ಸಾಕಿದ್ದರಾದ್ದರಿಂದ ತಿಂಗಳು ತಿಂಗಳು ಅಷ್ಟೋ ಇಷ್ಟೋ ಕಳಿಸಿದರಾಯಿತು ಎಂದುಕೊಂಡು ಒಂದು ವಾರ ಇರುವುದಕ್ಕಾಗಿ ಬಂದಿದ್ದು ಇಲ್ಲಿಗೆ. ಆದರೆ ಇಷ್ಟು ದೊಡ್ಡ ಆಘಾತ ಭರಸಿಡಿಲಿನಂತೆ ಬಡಿದಿತ್ತು. ಆ ಮೂಗ ನನ್ನ ಅಪ್ಪನೇ ಅಲ್ಲ ಎಂಬ ಸತ್ಯ ತಿಳಿದಿತ್ತು. ಒಳ ಮನೆಯ ಗೋಡೆಗಳಿಗೆ ಬಹಳ ಸತ್ಯ ಗೊತ್ತಿರುತ್ತದೆ ಎಂದು ಎಲ್ಲೋ ಓದಿದ್ದೆ. ಆದರೆ ಈ ಗೋಡೆಗಳಲ್ಲಿ ನನ್ನನ್ನು ಅಲ್ಲಾಡಿಸುವ ಸತ್ಯವಿತ್ತು ಎಂದು ಗೊತ್ತಿರಲಿಲ್ಲ. ಅಮ್ಮನ ಬಗೆಗೂ ಅಸಹ್ಯವಾಗ ತೊಡಗಿತ್ತು. ಛೆ ಇದೆಂತ ಜೀವನ ? ಎನಿಸ ತೊಡಗಿತ್ತು. ಈ ಕ್ಷಣದಲ್ಲಿ ಮನೆ ಬಿಟ್ಟು ಹೋಗಬೇಕೆಂದು ನಿರ್ಧರಿಸಿ ಎಲ್ಲವನ್ನು ಪ್ಯಾಕ್ ಮಾಡಿಕೊಂಡು ಹೊರಟಿದ್ದೆ.  

ಯಾಕೋ ಅಮ್ಮನಿಗೆ ಹೇಳೋಣ ಅನಿಸಿತು. ಅಮ್ಮ ಒಳಮನೆಯ ಕಿಟಕಿಗೆ ತಲೆ ಕೊಟ್ಟು, ಈಗಲೋ ಆಗಲೋ ಮಳೆ ಬರುವಂತಿದ್ದ ಕಾರ್ಮುಗಿಲ ದಿಟ್ಟಿಸುತ್ತ ಕುಳಿತಿದ್ದಳು. ಹೆಜ್ಜೆ ಸಪ್ಪಳಕ್ಕೆ ತಿರುಗಿ ನೋಡಿದವಳು "ಹೇಳದೆ ಹೊರಟು ಬಿಟ್ಟೆ ಎಂದುಕೊಂಡೆ. ಹೇಳಿ ಹೋಗಲು ಬಂದೆಯಾ??" ಎಂದಳು. ತಲೆಯಾಡಿಸಿದ್ದೆ. "ನನ್ನ ಮೇಲೆ ಅಸಹ್ಯವಾಗಿರಬೇಕಲ್ಲ ?? ನನ್ನ ಮಾತುಗಳು ಅಸಹ್ಯ ಎನಿಸದಿದ್ದರೆ ನಿನ್ನೊಡನೆ ಸ್ವಲ್ಪ ಮಾತನಾದಬೇಕಿದೆ ಕೇಳುವೆಯಾ" ಎಂದವಳು ನನ್ನ ಮುಖವನ್ನೂ ನೋಡದೆ ತನ್ನಷ್ಟಕ್ಕೆ ತಾನೇ ಎಂಬಂತೆ ಮಾತನಾಡತೊಡಗಿದಳು. ನಿನಗೆ ಅಮ್ಮನಾಗುವ , ಗಂಡನಿಗೆ ಹೆಂಡತಿಯಾಗುವ, ಅತ್ತೆಗೆ ಸೊಸೆಯಾಗುವ ಮೊದಲು ನಾನೂ ನಿನ್ನಂತೆಯೇ ಹೆಣ್ಣಾಗಿದ್ದೆ ಕಣೆ. ನನಗೆ ಅಮ್ಮನ ಕೈ ತುತ್ತಿನ ಸವಿ, ಜೋಕಾಲಿ, ಹಲಪೆಯಾಟದ ನೆನಪುಗಳಿದ್ದವು.. ಹರೆಯದ ವೈಯ್ಯಾರ , ಒನಪು, ಚಂದದಿ ಅರಳಿದ ಕನಸುಗಳಿದ್ದವು.. ಆಗ ತಾನೇ ಅರಳಿದ ಪ್ರೀತಿಯಿತ್ತು ಬದುಕಲ್ಲಿ.. ಆದರೆ ಪ್ರತಿಷ್ಠೆಯ ದಳ್ಳುರಿಯಲ್ಲಿ ನನ್ನ ಪ್ರೀತಿಯನ್ನೂ, ಪ್ರೀತಿಸಿದವನನ್ನೂ ಕೊಂದು ನಿನ್ನ ಅಪ್ಪನೆನಿಸಿಕೊಂಡವನ ತಾಳಿಗೆ ಕೊರಳೊಡ್ಡಿಸಿದರು ಮಾರಿ ಗದ್ದುಗೆಗೆ ಕುರಿ ಕೊರಳಿಡುವಂತೆ. ಅಲ್ಲಿಗೆ ತವರ ಸಂಬಂಧ ಕಡಿದು ಬಿತ್ತು. ಹೆಣ್ಣು ಸಹನಾ ಧರಿತ್ರಿ ಅಲ್ಲವೇ . ಎಲ್ಲವನ್ನು ಮರೆತು ಹೊಸ ಬದುಕು ಕಟ್ಟುತ್ತೇನೆ ಎಂದುಕೊಂಡೆ. ಆದರೆ ಅತ್ತೆ ಎನಿಸಿಕೊಂಡವಳು ನನಗೆಂದೂ ತಾಯಿಯಾಗಲಿಲ್ಲ. ಗಂಡನಾದವನು ಗಂಡನ ದರ್ಪ ತೋರಿದನೆ ವಿನಃ ಗೆಳೆಯನಾಗಲಿಲ್ಲ. ಒಂದು ವರ್ಷದಲ್ಲಿ ನೀನು ಹೊಟ್ಟೆಯಲ್ಲಿದ್ದೆ. ಹೆಣ್ಣು ಮಗುವಾದರೆ ನಿನಗೆ ಈ ಮನೆಯಲ್ಲಿ ಜಾಗವಿಲ್ಲ ಎಂದು  ಮೊದಲೇ  ಅತ್ತೆಯ ತಾಕೀತು. ಹೆಣ್ಣಾದರೆ ಅವಳನ್ನು ಮತ್ತೆ ಕರೆತರುವ ಅವಶ್ಯಕತೆಯಿಲ್ಲ ಎಂದು ಮಾವ ಒಳಮನೆಯಲ್ಲಿ ನಿಂತು ಅಬ್ಬರಿಸಿದ್ದು, ಹೆರಿಗೆ ನೋವಿನಿಂದ ನರಳುತ್ತಿದ್ದರೂ ಕಿವಿಗೆ ತಾಕಿತ್ತು . ಆಸ್ಪತ್ರೆಯಲ್ಲಿ ನಿನ್ನ ಹೆತ್ತು , ನಿನ್ನ ಸ್ಪರ್ಶವನ್ನು ಆನಂದಿಸುತ್ತಿದ್ದವಳಿಗೆ ಕೇಳಿದ್ದು "ಹೆಣ್ಣುಮಗುವಮ್ಮ" ಎಂದ ನಿನ್ನಪ್ಪನ ಕೊನೇ ಮಾತು. ಆಮೇಲೆ ಅವರ ಮಾತು ಕೇಳಲಿಲ್ಲ , ಮುಖ ನೋಡಲಿಲ್ಲ. ಹೆಣ್ಣು ಹೆತ್ತ ಕಾರಣಕ್ಕೆ ಹಸಿ ಬಾಳಂತಿಯನ್ನು ಆಸ್ಪತ್ರೆಯಲ್ಲೇ ಬಿಟ್ಟು ನಡೆದಿದ್ದರು ನನ್ನ ಗಂಡನ ಮನೆಯವರು. ಗಂಡನ ಮನೆಯ ಸಂಬಂಧವೂ ಹಾಗೆ ಕಡಿದಿತ್ತು.  ಅಲ್ಲಿಂದ ಹೊರಬಿದ್ದ ನನ್ನನ್ನು ಹದ್ದಿನ ಕಣ್ಣಿನ ಸಮಾಜ ಹಸಿ ಮಾಂಸದ ತುಂಡಿನಂತೆ ನೋಡುತ್ತಿತ್ತು. ಆಗ ಜೋತೆಯಾದವನು ಈ ಮೂಗ. ಮನೆಗೆ ಬಾ ಎಂದು ಕರೆದುಕೊಂಡು ಬಂದ. ಒಂದೇ ಸೂರಿನಡಿಯಲ್ಲಿ ಗಂಡು ಹೆಣ್ಣು  ಸಂಬಂಧವಿಲ್ಲದೆ ಬದುಕುವುದನ್ನು ಸಮಾಜ ಒಪ್ಪುವುದಿಲ್ಲ ಅಲ್ಲವೇ? ಅದಕ್ಕೆ ಈ ತಾಳಿ ತಂದು ಕೊಟ್ಟು , ನೀನೆ ಕಟ್ಟಿಕೋ ಎಂದು ಸನ್ನೆ ಮಾಡಿದ. ಅವನ ಸನ್ನೆಯಂತೆ ನಾನೇ  ಕಟ್ಟಿಕೊಂಡೆ. ಅವತ್ತಿನಿಂದ ಮಗಳಲ್ಲದ ನೀನು , ಹೆಂಡತಿಯಲ್ಲದ ನಾನು ಅವನ ಮೂಕ ಪ್ರಪಂಚದ ಭಾಗವಾದೆವು. ನಮಗಾಗಿ ಅವರಿವರ ಮನೆಯ ಜಮೀನಿನಲ್ಲಿ ಗೇಣಿ ಮಾಡಿ ಗಾಣದೆತ್ತಿನಂತೆ ದುಡಿದು ಈ ಮನೆ ಮಾಡಿದರು. ನಿನಗೆ ಯಾವುದಕ್ಕೂ ಕಡಿಮೆಯಾಗದಂತೆ ನಿನ್ನ ಬೆಳೆಸಿದರು. ವಿದ್ಯೆ ಕಲಿಸಿದರು. ಮೂಕ ಮನಸ್ಸಿನಲ್ಲಿ ನಿನ್ನ ಮದುವೆಯ ಕನಸು ಕಂಡರು. ನಿನಗಾಗಿ ಚಿನ್ನ ಮಾಡಿಸಿದರು, ಬ್ಯಾಂಕಿನಲ್ಲಿ ಹಣ ಕೂಡಿಟ್ಟರು. ಅವರು ಬಂದ ತಕ್ಷಣ ಅವರನ್ನು ಕೇಳಿ ಆ ಕಾಗದ ಪತ್ರಗಳನ್ನು ನಿನಗೆ ಒಪ್ಪಿಸುತ್ತೇನೆ ಅಲ್ಲಿವರೆಗೂ ದಯವಿಟ್ಟು ನಿಲ್ಲು. ದೇವರು ನನ್ನಿಂದ ಪ್ರೀತಿಯನ್ನು ಕಿತ್ತುಕೊಂಡ. ತವರನ್ನು ದೂರ ಮಾಡಿದ . ಹೆಣ್ಣು ಹೆತ್ತಿದ್ದಕ್ಕಾಗಿ ಗಂಡನ ಮನೆಯವರನ್ನು ದೂರ ಮಾಡಿದ . ಹೆಣ್ಣು ಮಗಳಾದ ನಿನ್ನನ್ನೂ ದೂರ ಮಾಡುತ್ತಿದ್ದಾನೆ. ಆದರೂ ಬೇಸರವಿಲ್ಲ ,ಕಾರಣ ನನ್ನ ಮೌನ ಪ್ರಪಂಚವನ್ನೂ,ಅದರ ಸುಖವನ್ನು ಅವನು ಕಸಿದುಕೊಳ್ಳಲಾರ ಎಂದವಳು ನನ್ನ ಮುಖ ನೋಡಿ, ಇರು ಎಂದೂ ಒಳಗೆ ಹೋಗಿ ಒಂದು ಮಫ್ಲರ್ ಮತ್ತು ಸ್ವೆಟ್ಟರ್ ತಂದು , ಮೊನ್ನೆ ಸಂತೆಗೆ ಹೋದವರು ಮಳೆಗಾಲಕ್ಕೆ ನಿನಗೆ ಅಂತಾ ಇವರು ತಂದಿದ್ದಾರೆ ತೆಗೆದುಕೋ ಎಂದು ಕೈಗಿತ್ತಳು. ಸತ್ಯವನ್ನು ಮುಚ್ಚಿಡಬೇಕೆಂದುಕೊಂಡಿದ್ದೆ . ಆದರೆ ನಿನಗೆ ಗೊತ್ತಾದ ಅರ್ಧ ಸತ್ಯವನ್ನು ಪೂರ್ತಿಗೊಳಿಸಬೇಕಿತ್ತು ಅದಕ್ಕಾಗಿ ಎಲ್ಲವನ್ನೂ  ಹೇಳಿದೆ. ದಯವಿಟ್ಟು ನನ್ನ ಕಮಿಸು ಎಂದು ಕುಸಿದು ಕುಳಿತಳು.

ಹೊರಗಡೆ ಧೋ ಎಂದು ಮಳೆ ಸುರಿಯುತ್ತಿತ್ತು, ಆದರೆ ಅದರ ಪರಿವಿರಲಿಲ್ಲ. ಅಮ್ಮನ ಮಾತಿನ ಮಳೆ ಮನಸ್ಸಿನ ಎಲ್ಲ ಕೊಳೆಗಳನ್ನು ತೊಳೆದು ಹಾಕಿತ್ತು. ಹುಟ್ಟಿಸಿದ ಅಪ್ಪನೆನಿಸಿಕೊಂಡವ ನನ್ನನ್ನು  ಹೆಣ್ಣೆಂದು ತೊರೆದು ಹೋಗಿದ್ದ. ಆದರೆ ಅಪ್ಪನಲ್ಲದವನು ನನ್ನನ್ನೇ ಬದುಕೆಂದುಕೊಂಡು, ಗಂಧದಂತೆ ತನ್ನನ್ನು ಸವೆಸಿಕೊಂಡು ಅಪ್ಪನ ಎಲ್ಲ ಜವಾಬ್ದಾರಿಗಳನ್ನು ನಿರ್ವಹಿಸಿದ್ದ. ಆದರೆ ನಾನು ಯಾವುದನ್ನೂ  ಅರ್ಥ ಮಾಡಿಕೊಂಡಿರಲಿಲ್ಲ. ಬದುಕ ತುಂಬಾ ಮೌನವಾಗಿ ಪ್ರೀತಿಸಿದವನಿಗೆ ನಾನು ಕೊಟ್ಟಿದ್ದು ತಿರಸ್ಕಾರ ಮಾತ್ರ. ಈಗ ಯಾವುದೂ ಬೇಡವಾಗಿತ್ತು. ಓಡಿ ಹೋಗಿ ಅಮ್ಮನನ್ನು ತಬ್ಬಿಕೊಂಡೆ."ನನ್ನನ್ನು ಕ್ಷಮಿಸಿಬಿಡಮ್ಮ . ಇನ್ನು ಯಾವತ್ತೂ ನಿಮ್ಮಿಬ್ಬರನ್ನು ಬಿಟ್ಟು ಎಲ್ಲೂ ಹೋಗಲಾರೆ. ಇಲ್ಲಿಯೇ ಕೆಲಸ ಹಿಡಿಯುತ್ತೇನೆ . ನಿಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನನ್ನ ಕ್ಷಮಿಸು " ಎಂದು ಬೇಡಿಕೊಂಡೆ. ಬೊಗಸೆಯಲ್ಲಿ ನನ್ನ ಮುಖ ಹಿಡಿದುಕೊಂಡು ಹಣೆಗೆ ಮುತ್ತಿಟ್ಟು ಎದೆಗೆ ಒತ್ತಿಕೊಂಡಳು. ಕ್ಷಮಿಸುತ್ತಿಯಲ್ಲವೇ ? ಅಪ್ಪನು ಕ್ಷಮಿಸುತ್ತಾರೆನಮ್ಮ?? ಎಂದೆ. ತುಸುನಕ್ಕು  ಕಿವಿ ಮುಚ್ಚುವಂತೆ ಮಫ್ಲರ್ ಸುತ್ತಿ , ಸೆಟ್ಟರ್ ತೊಡಿಸಿ "ತುಂಬಾ ಚಳಿಯಿದೆ.ಬೆಚ್ಚಗೆ ಹೊದ್ದುಕೊ. ಇವರು ಬರುವ ಹೊತ್ತಾಯಿತು  ಮಳೆಯಲ್ಲಿ ನೆನೆದು ಬರುತ್ತಾರೆ,   ಬೆಂಕಿ ಮಾಡಿ ಬಿಸಿನೀರು ಕಾಯಿಸಬೇಕು ಎನ್ನುತ್ತಾ ಒಳಗೆ ಹೋದಳು. ಅಪ್ಪ ಬರುವ ದಾರಿ ಕಾಯುತ್ತಾ ಅಲ್ಲೇ ಕುಳಿತೆ. 

ತಡೆದ ಮಳೆ ಜಡಿದು ಹೊಡೆಯುತ್ತದಂತೆ. ಒಂದು ದೊಡ್ಡ ಮಳೆ ಬಂದು ನಿಂತು ಆಕಾಶ ನಿರ್ಮಲವಾಗಿತ್ತು. ಅಂತೆಯೇ ಮನಸ್ಸೂ ಕೂಡ. ಹೊದ್ದುಕೊಂಡಿದ್ದ ಸ್ವೆಟ್ಟರ್ ಮತ್ತು ಮಫ್ಲರ್ ಬೆಚ್ಚ್ಚಗಾಗಿಸುತ್ತಿದ್ದರೆ , ಅದರೊಳಗಿದ್ದ ಪ್ರೀತಿಯ ಭಾವ ಇನ್ನೂ  ಅಪ್ಯಾಯಮಾನವಾಗಿತ್ತು. "ಬೇಗ ಬನ್ನಿ ಅಪ್ಪಾ. ನಿಮ್ಮ ಮೌನ ಪ್ರಪಂಚದ ಭಾಗವಾಗಬೇಕಿದೆ. ಮಡಿಲಲ್ಲಿ ತಲೆಯಿಟ್ಟು ಮಲಗಬೇಕಿದೆ. ನಿಮ್ಮ ಸನ್ನೆಯ ಮಾತುಗಳನ್ನು ಅರ್ಥ ಮಾಡಿಕೊಳ್ಳಬೇಕಿದೆ. ಸನ್ನೆಯಲ್ಲೇ ನಿಮ್ಮೊಡನೆ ಮಾತನಾಡಬೇಕಿದೆ. ನನ್ನ ಸನ್ನೆಗಳು ನಿಮಗೆ ಅರ್ಥವಾಗಬಹುದಾ?? ಗೊತ್ತಿಲ್ಲ. ಆದರೆ ಈಗಿನಿಂದಲೇ ಸನ್ನೆಯಲ್ಲಿ ಮಾತನಾಡುವುದನ್ನು ಕಲಿಯಬೇಕಿದೆ ನನಗೆ". 

Wednesday, 3 October 2012

ಮಟಿರಿಯಲಿಸ್ಟಿಕ್ ಜೀವನ , ಅದನ್ನೇ ಪ್ರೀತಿಸಬೇಕು





ಬಾಲ್ಕನಿಯಲ್ಲಿ  ನಿಂತಿದ್ದೆ.  ಏನು ಅಮ್ಮಾವ್ರು ದಿನಾ ೧೦ ಗಂಟೆಗೆ ಇಲ್ಲೇ ಇರ್ತಿರಲ್ಲ? ಮೊಬೈಲ್ ಕೂಡ ರೂಮಲ್ಲೇ ಬಿಟ್ಟು ಬರ್ತೀಯ. ಇಲ್ಲೇನು ಮಾಡ್ತಿಯ ಅಂತ ಕೇಳುತ್ತ ರೂಂ ಮೆಟ್ ಬಂದಳು. ಪಕ್ಕದ ಮನೆಯ ಟೆರ್ರೆಸ್ ಕಡೆ ಕೈ ತೋರಿಸಿದೆ. ಪುಟ್ಟ ಮಗು ಗಲ್ಲಕ್ಕೆ ಕೈ ಕೊಟ್ಟು ಕುಳಿತಿತ್ತು.  ಅಲ್ಲೇನು ಮಾಡ್ತಿದೆ ಅದು ಎಂದಳು. ಸುಮ್ನೆ ನೋಡು ಎಂದೇ. ಆ ಮಗು ಆಕಾಶ ನೋಡ್ತಾ, ಅಲ್ಲೇ ಇರೋ ಬಾಲ್ ಆಡುತ್ತ, ಪಕ್ಕದಲ್ಲಿರೋ ಜೋಕಾಲಿಯಲ್ಲಿ ಜೀಕುತ್ತ  , ಆಗಾಗ ರೋಡ್ ಕಡೆ ನೋಡುತ್ತಾ  ಏನೋ ಪದ್ಯಗಳನ್ನು ಹೇಳುತ್ತಾ ಇತ್ತು. ಇಬ್ಬರೂ ನೋಡುತ್ತಾ ಇದ್ದೆವು. ದಿನಾ ಹೀಗೆ ಆಡುತ್ತೆ ಕಣೆ ಇದು. ನೋಡೋಕೆ ಮಜಾ, ಅದಿಕ್ಕೆ ಇಲ್ಲಿರ್ತೀನಿ ಅಂದೆ. ಮಾತಾಡಿಸೇ ಅಂದಳು. ಹಾಯ್ ಪುಟ್ಟ ಅಂದೆ. ಹೆದರಿ ಕೆಳಗೆ ಹೋಗುತ್ತೆ ಮಗು ಅಂದುಕೊಂಡೆವು , ಬದಲಾಗಿ ಆ ಕಡೆಯಿಂದ ಏನು? ಎಂದು ಉತ್ತರ ಬಂತು. ಇಲ್ಲೇನು ಮಾಡ್ತಿದ್ದೀಯ ಕೇಳಿದೆ. ಅಮ್ಮನಿಗೆ ಕಾಯ್ತಾ ಇದ್ದೀನಿ , ಅಮ್ಮಾ ಬರ್ತಾಳೆ ಈಗಾ ಎಂದಿತು ಪಾಪು. ಎಲ್ಲಿ ಎಂದು ಇವಳು ಕೇಳಿದಳು. ಮಗು ರೋಡಿನ ಕಡೆಗೆ ಕೈ ತೋರಿತು.ನೀವೇನು ಮಾಡ್ತಿದ್ದೀರ ? ನಿಮ್ಮ ಅಮ್ಮನು ಬರ್ತಾರ? ಎಂದ ಮಗುವಿನ ಮುಗ್ದ ಪ್ರಶ್ನೆಗೆ ಉತ್ತರ ಹೊಳೆಯಲಿಲ್ಲ ಇಬ್ಬರಿಗೂ. ಆಗ ಸುಮಾರು ೧೧.೩೦. ಮನೆಯ ಎದುರು ಒಂದು ಕ್ಯಾಬ್ ಬಂದು ನಿಂತಿತು.  ಅಮ್ಮಾ ಬಂತು , ಅಮ್ಮಾ ಬಂತು ಎಂದು ಮಗು  ಖುಷಿ ಪಟ್ಟು ನಲಿಯುತ್ತಿತ್ತು. ಅದರಿಂದ ಇಳಿದ ಮಹಿಳೆ ನೇರವಾಗಿ ಬಾಲ್ಕನಿಗೆ ಬಂದು ಮಗುವನ್ನು ಅಪ್ಪಿ ಮುದ್ದಾಡಿ ಕರೆದುಕೊಂಡು ಹೋದಳು. 

ನೋಡಿದ್ಯ ಮಗು ಎಷ್ಟೊಂದು ಅಮ್ಮನಿಗಾಗಿ ಹಂಬಲಿಸುತ್ತೆ, ಇಷ್ಟು ಪುಟಾಣಿ ಮಕ್ಕಳನ್ನು ಬಿಟ್ಟು ಅದು ಹೇಗೆ ಕೆಲಸಕ್ಕೆ ಹೋಗ್ತಾರೋ ಏನೋ ಎಂದೆ.  ಅದಿಕ್ಕೆ ಇವಳು ಪಾಪ ಆ ತಾಯಿಯು ಆಫಿಸಿನಲ್ಲಿ ಮಗುವಿಗಾಗಿ  ಅದೆಷ್ಟು ಹಂಬಲಿಸಿದ್ದಾಳೋ ಏನು ಗೊತ್ತು. ಇಲ್ಲಿನ ಅನಿವಾರ್ಯತೆಗಳಿಗಾಗಿ, ಜೀವನ ಶೈಲಿಗಾಗಿ ದುಡಿಯಲೇ ಬೇಕಲ್ಲವಾ?? ಎಂದಳು. ಹ್ಮ್ಮ್ ಈ ಹೊತ್ತಿನಲ್ಲಿ ಬಂದು ಮಗುವಿನ ನಗು ನೋಡಿ ಸುಸ್ತು ಕಳೆದುಕೊಳ್ಳುವ ಅಮ್ಮಂದಿರಿರುವಂತೆ, ನಿದ್ದೆ ಮಾಡುತ್ತಿರುವ ಪುಟ್ಟ ಮಗುವಿನ ಹಣೆಗೆ ತುಟಿಯೊತ್ತಿ ಈಗ ಕೆಲಸಕ್ಕೆ ಹೊರಡುವ ಅಮ್ಮಂದಿರು ಇರುತ್ತಾರೆ ಎಂದೆ.  ಹೌದಮ್ಮ ಇದು ಬೆಂಗಳೂರು,  ಇಲ್ಲಿ  ಯಾವುದಕ್ಕೂ ಆದಿ ಅಂತ್ಯಗಳಿಲ್ಲ. ಇಲ್ಲಿ ಎಲ್ಲವೂ ನಿರಂತರವೇ.ಇಲ್ಲಿ ೨೪/೭ ಬಾಗಿಲು ಮುಚ್ಚದ, ಲೈಟ್ ಆಫ್ ಆಗದ ಕಂಪೆನಿಗಳೂ  ಇವೆ.ಎಲ್ಲವೂ ಯಾಂತ್ರಿಕ, ಎಲ್ಲವು ಶಿಫ್ಟ್ ಗಳಂತೆ, ಊಟ, ತಿಂಡಿ, ನಿದ್ದೆ ಎಲ್ಲವೂ,  ಕೊನೆಗೆ ದಿನ ರಾತ್ರಿಗಳು ಕೂಡ..  ಮಟಿರಿಯಲಿಸ್ಟಿಕ್ ಜೀವನ, ಅದನ್ನೇ ಪ್ರೀತಿಸಬೇಕು ಎಂದಳು. ಹೌದಲ್ವ ಅಂದೆ. ನೋಡು ಯಾರಿಗೆ ಯಾವ ಶಿಫ್ಟೋ ಏನೋ ನಮಗಂತೂ ಮಲಗೋ ಶಿಫ್ಟ್,ಅವಾಗಲೇ ಹನ್ನೆರಡುವರೆ ಬಾ ಮಲಗೋಣ ಎನ್ನುತ್ತಾ ಎಳೆದುಕೊಂಡು ಬಂದಳು. 

 ಬಂದು ಮಲಗಿದವಳಿಗೇಕೋ ನಿದ್ದೆ ಬರಲಿಲ್ಲ. ನಮ್ಮಲ್ಲಿ ಮುಸ್ಸಂಜೆಯಾದರೆ ಸಾಕು ಕತ್ತಲಾಯಿತು ಬಾಗಿಲು ಹಾಕು, ದೇವರಿಗೆ ದೀಪ ಹಚ್ಚು ಎನ್ನುತ್ತಾರೆ. ದೀಪ ಹಚ್ಚಿ ಬಂದು ಮತ್ತೊಮ್ಮೆ ಬಾಗಿಲೆಲ್ಲ ಭದ್ರವಾ ಎಂದು ನೋಡುವಷ್ಟರಲ್ಲಿ ಕತ್ತಲು  ಗವ್ವನೆ ಕವಿದಿರುತ್ತದೆ  ಹೆದರಿಸುವಷ್ಟು. ಆದರೆ ಇಲ್ಲಿ ಕತ್ತಲನ್ನೇ ನಾಚಿಸುವಷ್ಟು ದೀಪಗಳ ಸಾಲು. ಆಗಸದಲ್ಲಿ ನಕ್ಷತ್ರ ಕಂಡರೆ ಮಾತ್ರ ರಾತ್ರಿಯಿರಬೇಕು ಎಂದುಕೊಳ್ಳುವಷ್ಟು. ಆ ದೂರದ ಅಪಾರ್ಟ್ಮೆಂಟ್ ನಲ್ಲಿ ಕಾಣುವ ಲೈಟ್ ಗಳೆಲ್ಲ ಆರುವುದೇ ಇಲ್ಲವೇನೋ. ನಮ್ಮಲ್ಲಿ ಕತ್ತಲಾದರೆ ದಿನ ಮುಗಿಯಿತು.ಬೆಳಗಿನ ಸುಸ್ತೆಲ್ಲ ಕಳೆದುಕೊಳ್ಳಲೊಂದು ರಾತ್ರಿ   . ನಾಳೆ ಮತ್ತದೇ ದಿನ, ದುಡಿತ, ಆದರೆ ಇಲ್ಲಿ ಹಾಗಲ್ಲ ಹಗಲಿರುಳು ದುಡಿತವೇ, ದಿನರಾತ್ರಿಯ ವಿಂಗಡನೆಯೇ ಇಲ್ಲ  ಎಂದುಕೊಳ್ಳುತ್ತಿರುವಾಗಲೇ ಆ ಅಪರಾತ್ರಿಯಲ್ಲಿ ಕೆಳಗೆ ಬಂದು ನಿಂತ ಯಾವುದೋ ವಾಹನದಿಂದ ಚಂದಿರನನನ್ನು ಚಂದಿರನೆನ್ನಲು ಅಂಜಿಕೆಯೇನು ಅಳುಕಿನ್ನೇನು.. ಎಂಬ ಕನ್ನಡ ಹಾಡೊಂದು ಮೊಳಗುತ್ತಿತ್ತು. ಎಲ್ಲರನ್ನು ಸೇಫ್ ಆಗಿ ಮನೆಗೆ ಬಿಟ್ಟು ಬಂದ ಕ್ಯಾಬ್ ಡ್ರೈವರ್ ಸ್ವಲ್ಪ ಹೊತ್ತು ಹಾಡು ಕೇಳಿ ಮಲಗುತ್ತಾನೆ. ಇಲ್ಲಿಗೆ ಇವನ ದಿನ ಮುಗಿಯಿತು ಎಂದುಕೊಂಡೆ. ಹೊರಗಡೆ ಹೆಜ್ಜೆ ಸದ್ದು, ಇದು ಮೇಲಿನ ಮನೆಯ ಪೇಪರ್ ಏಜೆನ್ಸಿ ನಡೆಸುತ್ತಿರುವ ಹುಡುಗರದ್ದು,  ಪೇಪರ್ ಗಾಡಿ ಬರುವ ಹೊತ್ತು, ಜೊತೆಯಲ್ಲೇ ಪಕ್ಕದ ರೂಂ ನಿಂದ ಅಲರಾಂ ಶಬ್ದ. ಆ ಹುಡುಗಿಗೆ ಬೆಳಗ್ಗೆ ೫ ಗಂಟೆಗೆ ಲಾಗಿನ್. ಅವಳು ಸ್ವಲ್ಪ ಹೊತ್ತಿನಲ್ಲೇ ಹೊರಡುತ್ತಾಳೆ. ಆ ಡ್ರೈವರ್ ಕೆಲಸ ಮುಗಿಸಿ ಮಲಗುವ ಹೊತ್ತಿಗೆ, ಇವರೆಲ್ಲರಿಗೆ ಮತ್ತೆ  ದಿನದ  ಪ್ರಾರಂಭ. ರೂಂ ಮೆಟ್ ಹೇಳಿದಂತೆ  ಎಲ್ಲ ಇಲ್ಲಿ ನಿರಂತರವೇ ಎಂದುಕೊಳ್ಳುತ್ತ ಕತ್ತಲಲ್ಲೂ ಅವಳೆಡೆಗೆ ನೋಡಿದೆ. 

ಆಗಲೇ ದೂರದ ಮಸೀದಿಯ ಮೈಕಿನಲ್ಲಿ ಪ್ರಾರ್ಥನೆ ಕೇಳತೊಡಗಿತ್ತು.  ಇನ್ನು ಹೂವು ,ತರಕಾರಿ ಮಾರುವವರಿಗೆಲ್ಲ ದಿನ ಪ್ರಾರಂಭವಾಗುತ್ತದೆ. ಮತ್ತೊಂದು ಹೊಸ ದಿನ ಎಂದುಕೊಳ್ಳುವಷ್ಟರಲ್ಲಿ  ಪಕ್ಕದ ಗುಡಿಯ ಘಂಟೆ ಮೊಳಗಿತ್ತು, ಜೊತೆಗೆ ಸುಪ್ರಭಾತವೂ ಕೂಡ.ಇನ್ನೊಂದು ಸ್ವಲ್ಪ ಹೊತ್ತಿನಲ್ಲಿ ಎದುರು ಮನೆ ಆಂಟಿ ಚಂದದ ರಂಗೋಲಿ ಹಾಕಲು ಬರುತ್ತಾಳೆ ಎಂದುಕೊಳ್ಳುತ್ತ ಮಗ್ಗುಲು ಬದಲಾಯಿಸುವ ಹೊತ್ತಿಗೆ ಮತ್ತೊಂದು ಬೆಳಗು ನಿಧಾನವಾಗಿ ತೆರೆದುಕೊಳ್ಳತೊಡಗಿತ್ತು.

(ಇದು ಸೆಪ್ಟೆಂಬರ್ 25 ರ ಲವಲವಿಕೆಯಲ್ಲಿ  ಪ್ರಕಟವಾದ ಲೇಖನ )

Monday, 10 September 2012

ಇದೆಲ್ಲ ಪ್ರೀತಿನಾ ??




ನಂಗೆ ಎಲ್ಲಿಲ್ಲದ ಸಿಟ್ಟು ಬಂದಿತ್ತು. ಬಂದಿತ್ತು ಏನು .. ಈಗಲೂ ಇದೆ. ಅಲ್ಲ ಮದ್ಯ ರಸ್ತೆಯಲ್ಲಿ ಅಷ್ಟೊಂದು ಸೀನ್ ಕ್ರಿಯೇಟ್ ಮಾಡೋ ಅವಶ್ಯಕತೆ ಇತ್ತಾ??  ನನ್ನ ದುಪ್ಪಟ್ಟಾ  ಗಾಳಿಯಲ್ಲಿ ಹಾರಿ ದಾರಿಯಲ್ಲಿ ಹೋಗುತ್ತಿದ್ದ ಬೈಕ್ ಚಕ್ರಕ್ಕೆ ಸಿಲುಕಿದರೆ ಅದರಲ್ಲಿ ಬೈಕ್ ಸವಾರನ ತಪ್ಪೆನಿತ್ತು ಹೇಳು. ಸುಮ್ಮನೆ ಅವನ ಬೈಕ್ ಎಳೆದು ಹಿಡಿದು ನಿಲ್ಲಿಸಿ , ಕತ್ತಿನ ಪಟ್ಟಿ ಹಿಡಿದು ಜಗಳ ಆಡುವಂತದ್ದೇನಿತ್ತು?  ಅದಕ್ಕಿಂತ ಬೇಜಾರಾಗಿದ್ದು ಆ ಬೈಕ್ ನ ಎಳೆದು ನಿಲ್ಲಿಸುವ ಭರದಲ್ಲಿ ಅದೇನೋ ತಗುಲಿಸಿಕೊಂಡು ಕೈ ಗೆ ಗಾಯ ಮಾಡಿಕೊಂಡೆಯಲ್ಲ  ಅದು. ತುಂಬಾ ನೋವಾಗುತ್ತಿರಬೇಕು ಅಲ್ಲವಾ..?? ಮನೆಗೆ ಬಂದು ಇದೆಲ್ಲವನ್ನೂ ಅಮ್ಮನಿಗೆ ಒಪ್ಪಿಸಿದರೆ "ಅದು ಪ್ರೀತಿ ಕಣೆ , ಅವನು ನಿನ್ನ ಪ್ರೀತಿಸ್ತಾಯಿದಾನೆ" ಅಂತ ಉರಿಯೋ ಬೆಂಕಿಗೆ ತುಪ್ಪ ಸುರಿಯುವ ಮಾತನಾಡುತ್ತಾಳೆ. ನೋಡು ಪುಟ್ಟಿ ಬರೀ ತರ್ಲೆ , ತಂಟೆ, ನಗು, ತುಂಟಾಟ ಅಂತ ಜೀವನಾನ ಸೀರಿಯಸ್ ಆಗಿ ತಗೊಳದೆ ಇರೊ ನೀನು ಬದುಕಿನ ಸೂಕ್ಷ್ಮತೆಗಳನ್ನು  ಅರ್ಥ ಮಾಡಿಕೊಂಡಿಲ್ಲ. ಪ್ರತಿ ಸಂಬಂಧಗಳಲ್ಲೂ ಅದರದೇ ಆದ ಸೂಕ್ಷ್ಮತೆಗಳಿರುತ್ತವೆ. ನೀನು ಸೂಕ್ಷ್ಮತೆಗಳನ್ನ ಅರ್ಥ ಮಾಡ್ಕೋ ಅಂತ ತಲೆ ನೇವರಿಸಿ ಕಾಫಿ ಕೊಟ್ಟು  ಒಳಗೆ ಹೋದಳು.

ಈಗ ಗೊಂದಲಕ್ಕೆ ಬಿದ್ದಿದ್ದೇನೆ ಮಾರಾಯ . ಇದೆಲ್ಲ ಪ್ರೀತಿನಾ ? ಈ ಮಹಾನ್ ಮೂಡಿ, ಕೋಪಿಷ್ಟೇ, ಜಗಳಗಂಟಿನಾ ಯಾವತ್ತಿಗೂ ನಗು ಮತ್ತು ಸಹನೆಯಿಂದ ಸಹಿಕೊಳ್ತಿಯಲ್ಲ ಅದು ಪ್ರೀತಿನಾ? ತುಂಬಾ ಮಾತಾಡಬೇಕು ಕಣೋ ಅಂತಾ ವಾಕಿಂಗ್ ಕರ್ಕೊಂಡ್ ಹೋಗಿ, ನಿನಗೆ ಚೂರೂ ಮಾತನಾಡಲು ಅವಕಾಶ ಕೊಡದೆ ಪಟ ಪಟಾಂತ ಮಾತಾಡ್ತಾ ಇದ್ರೆ, ಮುಖದಲ್ಲೊಂದು ಸಣ್ಣ ನಗು ಇಟ್ಕೊಂಡು ಸುಮ್ಮನೆ ಕೇಳ್ತಾ ಇರ್ತಿಯಲ್ಲ ಅದು ಪ್ರೀತಿನಾ? ನಂಗೆ ಮಾತಾಡೋ ಮೂಡ್ ಇಲ್ಲ ಅಂತ ಸುಮ್ನೆ ನಡಿತಾ ಇದ್ರೆ ನಮ್ಮಿಬ್ಬರ ಹೃದಯ ಬಡಿತಗಳಷ್ಟೇ ಕೇಳೋ ಅಷ್ಟು ಸೈಲೆಂಟ್ ಆಗಿ ಹೆಜ್ಜೆ ಹಾಕ್ತಿಯಲ್ಲ ನಂಜೊತೆ, ಆ ಹೆಜ್ಜೆಗಳಲ್ಲಿ ಇರೋದು ಪ್ರೀತಿನಾ? 

ಮಾತು - ಮೌನದಲ್ಲಿ ಜೊತೆ ಅಗ್ತಿಯಲ್ಲ ಇದು ಪ್ರೀತಿನಾ?

ನನ್ನ ಸಂತೋಷಗಳಿಗೆ ಜೋತೆಯಾಗ್ತಿಯಲ್ಲ. ಅದು ಪ್ರೀತಿನಾ? ನನ್ನ ಹಾಡುಗಳಿಗೆ ಕಿವಿಯಾಗ್ತಿಯಲ್ಲ ಅದು ಪ್ರೀತಿನಾ ? ಯಾವುದಾದರೂ ಕಾಂಪಿಟಿಶನ್ ಲಿ ಫಸ್ಟ್ ಬಂದ್ರೆ ನನಗಿಂತ ಜಾಸ್ತಿ ಖುಷಿ ಪಡ್ತಿಯಲ್ಲ. ಆ ಖುಷಿಯಲ್ಲಿರೋದು ಪ್ರೀತಿನಾ? ನೆಚ್ಚ್ಚಿನ ಗೆಳತಿ ನಮ್ಮನ್ನೆಲ್ಲ ಬಿಟ್ಟು ಹೋದಾಗ, ನಿನ್ನ ಹೆಗಲ ಮೇಲೆ ತಲೆಯಿಟ್ಟು ಬಿಕ್ಕಳಿಸಿದಾಗ, ಹೊದೊರೆಲ್ಲ ಬರಲ್ಲ. ನಾವೆಲ್ಲಾ ಇಲ್ವಾ ಜೊತೆಗೆ ಅಂತಾ ಬೆನ್ನ ಮೇಲೆ ಕೈ ಇಟ್ಟೆಯಲ್ಲ, ಆ ಸ್ಪರ್ಶದಲ್ಲಿದ್ದುದು ಪ್ರೀತಿನಾ? 

ನಗು - ಅಳು ಎರಡಲ್ಲೂ ಇರ್ತಿಯಲ್ಲ ಅದು ಪ್ರೀತಿನಾ?? 

ಎಲ್ಲರಲ್ಲೂ ಜಗಳ ಆಡಿಕೊಂಡು, ಏನೋ  ತರ್ಲೆ ಮಾಡಿಕೊಂಡು ಬಂದ್ರೆ ಅವಳ ಪರವಾಗಿ ನಾನು  ಸಾರೀ ಕೇಳ್ತೀನಿ, ಅವಳ ಮನೆಲ್ಲಿ ಕಂಪ್ಲೈಂಟ್ ಮಾಡ್ಬೇಡಿ ಅಂತಾ ಹೇಳಿ, ಮನೆಯವರಿಂದ ಬೈಗುಳ ತಪ್ಪಿಸ್ತಿಯಲ್ಲ ಅದು ಪ್ರೀತಿನಾ?? ವಿಪರೀತ ಜ್ವರ ಬಂದು ಆಸ್ಪತ್ರೆಗೆ ಅಡ್ಮಿಟ್  ಅದಾಗ, ನಾಳೆ ಹೊತ್ತಿಗೆ ಸರಿ ಅಗ್ತಿಯಾ ಅಂತಾ ಹಣೆ ಸವರಿ, ನಾಳೆ ಮಳೆ ಬಂದ್ರೆ  ನೆನೆದುಕೊಂಡು ಬರೋವಾಗಾ ಐಸ್ ಕ್ರೀಮ್ ತಿಂದ್ಕೊಂಡು ಬರೋಣ ಅಂತಾ , ಅಮ್ಮಂಗು ಕೇಳಿಸದಷ್ಟು ಸಣ್ಣಕೆ ಪಿಸುಗುಟ್ಟಿ ಕಣ್ಣು ಹೊಡೆದು ಹೋಗಿದ್ಯಲ್ಲ , ಆ ಕಣ್ಣೋಟದಲ್ಲಿ ಇದ್ದಿದ್ದು ಪ್ರೀತಿನಾ ?

ತರ್ಲೆಗಳಲ್ಲೂ ಪಾಲು ಕೇಳೋ ನಿಂದು ಪ್ರೀತಿನಾ??

ಹೆಣ್ಣು ಮಕ್ಕಳು ಹೂ ಮುಡ್ಕೊಂದ್ರೆ ಚೆಂದ ಅಂತಾ ಹೂವಿನಂಗಡಿ ಕಂಡಾಗ ಹೂ ಕೊಡ್ಸ್ತಿಯಲ್ಲ ಅದು ಪ್ರೀತಿನಾ? ಬರ್ತ್ ಡೆ ಗೆ ಬೆಲೆ ಕಟ್ಟೋಕೆ ಆಗದೆ ಇರೋ ಗಿಫ್ಟ್ ಕೊಡೊ ಅಂದಾಗ  ಕುಂಕುಮ ತುಂಬಿದ ಭರಣಿ ಕೊಟ್ಟು  ಬೆಲೆ ಕಟ್ಟು ನೋಡೋಣಾ  ಹುಬ್ಬು ಹಾರಿಸಿದ್ದೆ. ಅದರ ತುಂಬಾ ತುಂಬಿದ್ದು ಪ್ರೀತಿನಾ? ಕಣ್ಣೆದುರಿಗೆ ಇಲ್ಲಾ ಅಂದ್ರು ಕಣ್ಣಂಚಿನಲ್ಲಿ ಇಟ್ಕೊಂಡು ಜೋಪಾನ ಮಾಡ್ತಿಯಲ್ಲ ಇದು ಪ್ರೀತಿನಾ?

ಒಳ್ಳೆ ಗೆಳೆಯ ಅಂತ ಅನಿಸಿಕೊಳ್ತಿಯಲ್ಲ ಇದು ಪ್ರೀತಿನಾ?

  ಪಾಪ ಕೈ ಗಾಯ ತುಂಬಾ ನೋವಾಗ್ತಿರಬೇಕು ಫೋನ್ ಮಾಡಿ ಕೇಳೋಣವಾ ಅನಿಸ್ತಾಯಿದೆ. ಆದ್ರೂ ತಪ್ಪು ನಿಂದೆ. ಅದಕ್ಕೆ  "ಸಾರೀ ಕಣೆ " ಅಂತ ಒಂದು ಮಸ್ಸೇಜ್ ಮಾಡಲಿ ಅಂತ ಮೊಬೈಲ್ ಬೀಪ್  ಗಾಗಿ   ಹುಸಿ ಮುನಿಸಿನಿಂದಾ ಕಾಯ್ತಾ ಇದಿನಲ್ಲ ಇದು ಪ್ರೀತಿನಾ ??

ಮತ್ತೆ ಇದನ್ನೆಲ್ಲಾ ನಿನಗೇ ಹೇಳಬೇಕು ಅನಿಸ್ತಾಯಿದೆ ಇದೆಲ್ಲ ಪ್ರೀತಿನಾ ??


( ಇದು 14/08/2012 ರ ವಿಕೆ ಯಲ್ಲಿ ಪ್ರಕಟವಾದ ಬರಹ )

Thursday, 9 August 2012

ಯಾರಿಗೂ ದಕ್ಕಲಿಲ್ಲ ಇಡಿಯಾಗಿ.


ದೇವಕಿಯ ಕರುಳ ಕುಡಿಯಾಗಿ ..
ಯಶೋಧೆಯ ಕಣ್ಣ  ಬೆಳಕಾಗಿ ...
ತುಂಟ ಗೊಲ್ಲರಲಿ ...
ತಂಟೆ ಮಾಡುವ ಒಡನಾಡಿಯಾಗಿ..
ರುಕ್ಮಿಣಿ ಸಖನಾಗಿ .. 
ದ್ರೌಪದಿ ಸಹೋದರನಾಗಿ ...
ಭಾಮೆಯ ಮುಂಗೋಪದ ನುಡಿಯಾಗಿ ..
ವಿರಹಿ ರಾಧೆಯ ಬಿಸಿಯುಸಿರ ಕಿಡಿಯಾಗಿ ..
ಕಳ್ಳ ಕೃಷ್ಣ  ಕೊನೆಗೂ ...
ಯಾರಿಗೂ   ದಕ್ಕಲಿಲ್ಲ  ಇಡಿಯಾಗಿ ..